ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ.
ಇಂಡಿ ಆಗಷ್ಟ.9

ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸಿ ರೈತಪರವಾದ ಯೋಜನೆಗಳನ್ನು ಕೈ ಬಿಡುತ್ತಿರುವುದನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ರೈತ ಮೋರ್ಚಾ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ರ್ಯಾಲಿ ವಿವಿಧ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿ ತಲುಪಿತು.ಪ್ರತಿಭಟನೆ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿ, ಕಾಂಗ್ರೆಸ್ ಸರ್ಕಾರ ರೈತ ವಿರೋಧಿಯಾಗಿದೆ, ಕೇವಲ ಸುಳ್ಳು ಭರವಸೆಗಳನ್ನು ನೀಡಿ ಜನರನ್ನು ಯಾಮಾರಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರೈತರನ್ನು ಸಶಕ್ತರನ್ನಾಗಿ ಮಾಡುವ ಕಾರ್ಯ ಮಾಡುತ್ತಿಲ್ಲ, ರೈತರಿಗೆ ಬಲ ತುಂಬಲು ಬಿಜೆಪಿ ಸರ್ಕಾರ ಅವಧಿಯಲ್ಲಿ ರೂಪಿಸಲಾಗಿದ್ದ ಯೋಜನೆಗಳನ್ನು ಕೈ ಬಿಟ್ಟು ದ್ವೇಷ ರಾಜಕಾರಣ ಒಂದೆಡೆ ಮಾಡುತ್ತಿದ್ದರೆ ಇನ್ನೊಂದೆಡೆ ನಾಡಿಗೆ ಅನ್ನ ನೀಡುವ ಅನ್ನದಾತನಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರೈತರು ತಾವು ಬೆಳೆದ ಬೆಳೆಗಳನ್ನು ತಮಗಿಷ್ಟದಂತೆ ಮಾರಾಟ ಮಾಡಲು ಸ್ವಾತಂತ್ರ್ಯ ಕೊಡುವ ನಿಟ್ಟಿನಲ್ಲಿ ಬಿಜೆಪಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದಿತ್ತು, ಆದರೆ ಈಗ ದ್ವೇಷ ರಾಜಕಾರಣ ಭಾಗವಾಗಿ ಆ ತಿದ್ದುಪಡಿಯನ್ನು ರದ್ದುಗೊಳಿಸಿ ರೈತ ವಿರೋಧ ನೀತಿಯನ್ನು ಅನುಸರಿಸಿದೆ, ರೈತರು ತಾವು ಬೆಳೆದ ಬೆಳೆಗಳನ್ನು ಮಾರಾಟ ಮಾಡುವ ಅಧಿಕಾರವೂ ಇಲ್ಲವೇ ಎಂದು ಪ್ರಶ್ನಿಸಿದರು.ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸಂಜಯ ಪಾಟೀಲ ಕನಮಡಿ ಮಾತನಾಡಿ, ರೈತ ಪರವಾದ ರೈತ ವಿದ್ಯಾನಿಧಿ ಜಾರಿಗೆ ಅನಾಸಕ್ತಿ, ವಿದ್ಯುತ್ ದರ ಏರಿಕೆ ಮಾಡುವ ಮೂಲಕ ರೈತರಿಗೆ ದೊಡ್ಡ ಮಟ್ಟದ ಹೊರೆಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ರೈತರ ಮಕ್ಕಳಿಗೆ ನೆರವಾಗಿದ್ದ ರೈತ ವಿದ್ಯಾನಿಧಿಯನ್ನು ಬಿಜೆಪಿ ಜಾರಿಗೊಳಿಸಿದೆ ಎಂಬ ಕಾರಣದಿಂದ ರದ್ದುಗೊಳಿಸಿರುವುದು ಯಾವ ನ್ಯಾಯ ಎಂದು ದೂರಿದರು. ಈಗ ವಿದ್ಯುತ್ ದರ ಏರಿಕೆಯಿಂದ ಪಂಪಸೆಟ್ ಬಳಕೆ ಹೊರೆಯಾಗಿ ಪರಿಣಮಿಸಿದೆ, ಹತ್ತಿ ಉದ್ಯಮ, ಅಕ್ಕಿ ಮಿಲ್ ಮೊದಲಾದವುಗಳು ವಿದ್ಯುತ್ ದರ ಏರಿಕೆಯಿಂದ ನಲಗುತ್ತಿದ್ದು, ಇದರ ಪರಿಣಾಮ ರೈತರ ಮೇಲಾಗುತ್ತಿದೆ ಎಂದರು.ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕಾಸುಗೌಡ ಬಿರಾದಾರ ಮಾತನಾಡಿ, ರೈತಪರ ಯೋಜನೆಗಳನ್ನು ರದ್ದುಗೊಳಿಸುವುದು ಅನ್ನದಾತನಿಗೆ ಮಾಡುವ ದ್ರೋಹ, ಈ ದ್ರೋಹವನ್ನು ಕಾಂಗ್ರೆಸ್ ಎಸಗಿದೆ, ರೈತ ಕುಟುಂಬಗಳಿಗೆ ಭದ್ರತೆ ಒದಗಿಸುವ ಜೀವನ ಜ್ಯೋತಿ ವಿಮಾ ರದ್ದತಿ, ರಾಜ್ಯದ 1 ಲಕ್ಷ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿದ ರೈತರಿಗೆ ಭೂ ಸಿರಿ ಎಂಬ ಯೋಜನೆಯಲ್ಲಿ 10 ಸಾವಿರ ಹೆಚ್ಚುವರಿ ಸಹಾಯಧನ ನೀಡುವ ಬಿಜೆಪಿ ಸರ್ಕಾರದ ನಿರ್ಧಾರ ರದ್ಧತಿ, ಕೇಂದ್ರ ಸರ್ಕಾರದ ಜೊತೆ ಬಿಜೆಪಿ ಸಹ ಸಹಾಯ ಧನ ಒದಗಿಸುವ ಕಿಸಾನ್ ಸಮ್ಮಾನ್ ಯೋಜನೆಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಹಿಂದೇಟು, ನೀರಾವರಿ ಯೋಜನೆಗಳ ನಿರ್ಲಕ್ಷ್ಯ, ಕ್ಷೀರ ಸಮುದ್ರ ಸಹಕಾರ ಬ್ಯಾಂಕ್ ರದ್ಧತಿ ಹೀಗೆ ರೈತರ ಪರವಾದ ಯೋಜನೆಗಳ ರದ್ಧತಿ ಪಟ್ಟಿ ದೊಡ್ಡದಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕರ್ನಾಟಕ ಸಾವಯವ ಬೀಜ ಪ್ರಮಾಣನ ನಿಗಮದ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪ್ರಕಾಶ ಅಕ್ಕಲಕೋಟ, ಡಾ.ಸುರೇಶ ಬಿರಾದಾರ, ಮಲ್ಲಿಕಾರ್ಜುನ ಜೋಗೂರ, ಶಿವರುದ್ರ ಬಾಗಲಕೋಟ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಉಮೇಶ ಕೋಳಕೂರ, ಬಿಜೆಪಿ ಎಸ್ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ವಿವೇಕಾನಂದ ಡಬ್ಬಿ, ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಪಾಲಿಕೆ ಸದಸ್ಯ ರಾಹುಲ್ ಜಾಧವ,ಮಳುಗೌಡ ಪಾಟೀಲ, ಬಸವರಾಜ ಬಿರಾದಾರ, ಸಂಜೀವ ಐಹೊಳೆ, ಸಿದ್ದು ಬುಳ್ಳಾ, ವಿಠ್ಠಲ ಕಿರಸೂರ, ಸಂಪತ್ ಕುವಳ್ಳಿ, ಈರಣ್ಣ, ರಾಹುಲ್, ವಿನೋದ ಡೋಮನಾಳ, ರಾಜೇಶ ತಾವಸೆ, ಅಬ್ದುಲ್ ಸತ್ತಾರ ಕೊಲ್ಹಾರ, ಕಾಂತು ಶಿಂಧೆ, ವಿನಾಯಕ ದಹಿಂಡೆ, ಶಿವು ಮಡಿವಾಳರ, ರಾಮು ಚವ್ಹಾಣ, ಆನಂದ ಮುಚ್ಚಂಡಿ, ಜಗದೀಶ ಮುಚ್ಚಂಡಿ, ವಿಜಯ ಜೋಶಿ ಪಾಲ್ಗೊಂಡಿದ್ದರು.
ಜಿಲ್ಲಾ ವರದಿಗಾರರು:ರಾಜಶೇಖರ್.ಶಿಂಧೆ.ಶಿರಗುರ