ರಸ್ತೆ ಮಧ್ಯೆ ಬಸ್ಸ್ ತಡೆದು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ.
ಹುನಗುಂದ ನವೆಂಬರ್.22

ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ಹಾಗೂ ಅಲ್ಪಸ್ವಲ್ಪ ಬೆಳೆದ ತರಕಾರಿಯನ್ನು ಮಾರುಕಟ್ಟೆಗೆ ತರಲು ಸೂಕ್ತ ಬಸ್ ಸೌಲಭ್ಯ ಒದಗಿಸಬೇಕು ಎಂದು ಸಮೀಪದ ಹಿರೇಬಾದವಾಡಗಿ ಕ್ರಾಸ್ ಬಳಿ ಹಿರೇಬಾದವಾಡಗಿ ಗ್ರಾಮಸ್ಥರು ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳು ಬಸ್ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ಗ್ರಾಮದ ಮುಖಂಡ ಅಮರೇಶ ಜೂಲಕಟ್ಟಿ ಮಾತನಾಡಿ, ಸಕಾಲಕ್ಕೆ ಬಸ್ ವ್ಯವಸ್ಥೆ ಇಲ್ಲದ್ದರಿಂದ ಜನರು ಪಟ್ಟಣ ಸೇರಿದಂತೆ ಇನ್ನಿತರ ಪ್ರದೇಶಗಳಿಗೆ ತೆರಳಿ ಕೆಲಸ ಕಾರ್ಯಗಳನ್ನು ಮಾಡಲು ಹರಸಾಹಸ ಪಡಬೇಕಾಗಿದೆ. ಜೊತಗೆ ನಿತ್ಯ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತರಗತಿಗೆ ಹೋಗಿ ಅಧ್ಯಯನ ಮಾಡಲು ಸಾಧ್ಯ ವಾಗುತ್ತಿಲ್ಲ.ಹೀಗಾದರೆ ಹೇಗೆ.ಈ ಬಗ್ಗೆ ಸಂಬಂಧಪಟ್ಟ ಘಟಕದ ಮುಖ್ಯಸ್ಥರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಮತ್ತು ಜನ ಪ್ರತಿನಿಧಿಗಳಿಗೆ ಮೌಖಿಕವಾಗಿ ಹೇಳಿದರೂ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.ಮುಂದಿನ ದಿನಗಳಲ್ಲಿ ಸೂಕ್ತ ಸಾರಿಗೆ ಸೌಲಭ್ಯ ಒದಗಿಸಬೇಕು. ಇಲ್ಲವಾದರೆ ಎಲ್ಲಾ ಬಸ್ಗಳನ್ನು ತಡೆದು ಘಟಕದ ಮುಂದೆ ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಮಹಿಳೆಯರು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.ಪ್ರತಿದಿನ ಬೆಳಿಗ್ಗೆ ೧೦ಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಬೇರೆ ಶೆಡ್ಯೂಲ್ನ ಒಂದು ಬಸ್ ವ್ಯವಸ್ಥೆ ಮಾಡಲಾಗಿದೆ. ಆದರೂ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಮುಂದೆ ಆ ರೀತಿ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗುವದು ಎಂದು ಘಟಕದ ವ್ಯವಸ್ಥಾಪಕ ಎಸ್.ಆರ್.ಸೊನ್ನದ ಪ್ರತಿಕ್ರಿಯಿಸಿದರು.
ತಾಲೂಕ ವರದಿಗಾರರು: ಮಲ್ಲಿಕಾರ್ಜುನ.ಎಂ.ಬಂಡರಗಲ್ಲ ಹುನಗುಂದ