ಎಳ್ಳು ಅಮಾವಾಸ್ಯೆಯ ಸಮಸ್ತ ನಾಡಿನ ಜನತೆಗೆ ಸಂಭ್ರಮ ಸಡಗರ…..

ಉತ್ತರ ಕರ್ನಾಟಕದಲ್ಲಿ ಎಳ್ಳ ಅಮವಾಸ್ಯೆ ರೈತರ ಪಾಲಿಗೆ ಸಂಭ್ರಮದ ಹಬ್ಬ. ರೈತ ಮಹಿಳೆಯರು ಬಗೆ ಬಗೆಯ ಖಾದ್ಯ ಮಾಡಿಕೊಂಡು ಭೂತಾಯಿಗೆ ಪೂಜಿಸಿ, ಸಹಭೋಜನ ಮಾಡಿ ಸಂಭ್ರಮಿಸುತ್ತಾರೆ. ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಗದಗ, ಧಾರವಾಡ, ಕೊಪ್ಪಳ, ರಾಯಚೂರು ಜಿಲ್ಲೆ ಸೇರಿದಂತೆ ಬಹುತೇಕ ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಎಳ್ಳು ಅಮವಾಸ್ಯೆ ದಿನದಂದು ರೈತರು ಕುಟುಂಬ ಸಮೇತರಾಗಿ ಹೊಲಕ್ಕೆ ಹೋಗಿ ಚರಗ ಚೆಲ್ಲುತ್ತಾರೆ. ಉತ್ತರ ಕರ್ನಾಟಕ ಜಿಲ್ಲೆಯಲ್ಲಿ ಎಳ್ಳು ಅಮವಾಸ್ಯೆ ದಿನ ರೈತರು, ರೈತ ಮಹಿಳೆಯರು ಮಕ್ಕಳು ಸೇರಿದಂತೆ ಮನೆ ಮಂದಿ ಜೋಡೆತ್ತು ಗಾಡಿಗಳ ಚಕ್ಕಡಿ, ಟ್ರ್ಯಾಕ್ಟರ್ನಲ್ಲಿ ಬುತ್ತಿ ಕಟ್ಟಿಕೊಂಡು ಹೊಲಕ್ಕೆ ಹೋಗುತ್ತಾರೆ. ಎಳ್ಳು ಹಚ್ಚಿದ ರೊಟ್ಟಿ, ಎಳ್ಳು ಕಡುಬು, ಕಡಲೆಗಡುಬು, ಬದನೆಕಾಯಿ ಪಲ್ಲೆ, ಚಟ್ನಿಯಂತಹ ವಿವಿಧ ಖಾದ್ಯಗಳನ್ನು ಕಟ್ಟಿಕೊಂಡು ಹೊಲಕ್ಕೆ ಹೋಗಿ, ಬೆಳೆದು ನಿಂತಿರೋ ಜೋಳ, ಕಡಲೆ ಸೇರಿದಂತೆ ಹಿಂಗಾರು ಬೆಳೆಯಲ್ಲಿ ಐದು ಕಲ್ಲಿನ ಪಾಂಡವರು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ‘ಹುಲ್ಲು ಹುಲ್ಲಿಗೋ ಚೆಲ್ಲ ಚೆಲ್ಲಂಬರಿಗೋ’ ಎಂದು ಹೇಳುತ್ತಾ ಖಾದ್ಯಗಳನ್ನು ಹೊಲದ ತುಂಬೆಲ್ಲಾ ಚೆಲ್ಲುವುದೇ ಚರಗ. ಮನೆ ಮಂದಿ ಜೊತೆಗೆ ಹೊಲ ಇಲ್ಲದವರನ್ನು ಕರೆದು ಕೊಂಡು ಚರಗ ಚೆಲ್ಲಲು ಹೋಗುವುದು ಇನ್ನೊಂದು ವಿಶೇಷ. ಇನ್ನು ಚರಗ ಚೆಲ್ಲಿದ ಬಳಿಕ ಹೊಲದಲ್ಲಿ ಎಲ್ಲರೂ ಸೇರಿ ಸಹಭೋಜನ ಮಾಡುತ್ತಾರೆ.ಚರಗ ಚೆಲ್ಲುವದರ ಹಿಂದಿದೆ ವೈಜ್ಞಾನಿಕ ಕಾರಣ:ಎಳ್ಳು ಅಮವಾಸ್ಯೆಯಂದು ಯಾಕೆ ಚರಗ ಚೆಲ್ಲುತ್ತಾರೆ ಅನ್ನುವ ಪ್ರಶ್ನೆ ಸಹಜವಾಗಿ ಎಲ್ಲರಿಗೂ ಕಾಡುತ್ತೆ. ಚೆರಗ ಹಬ್ಬದ ಆಚರಣೆ ಹಿಂದೆ ಖಂಡಿತವಾಗಿಯೂ ವೈಜ್ಞಾನಿಕ ಕಾರಣವಿದೆ. ಎಳ್ಳು ಅಮವಾಸ್ಯೆ ಹೊತ್ತಿಗೆ ಹಿಂಗಾರು ಪೈರು ಬೆಳೆದು ನಿಂತಿರುತ್ತದೆ. ಅದ್ರಲ್ಲೂ ಜೋಳದ ಮಧ್ಯೆ ಕಡಲೆ ಬೆಳೆಗೆ ಕಾಯಿಕೊರಕ ಹುಳ ಬಿದ್ದು ಹಾನಿ ಮಾಡುತ್ತೆ. ಉತ್ತರ ಕರ್ನಾಟಕದಲ್ಲಿ ಅತೀ ಹೆಚ್ಚು ಜೋಳ, ಕಡಲೆಯನ್ನು ಹಿಂಗಾರು ಬೆಳೆಯಾಗಿ ರೈತರು ಬೆಳೆಯುತ್ತಾರೆ. ಈ ಹೊತ್ತಲ್ಲಿ ಹುಲ್ಲು ಹುಲ್ಲಿಗೋ ಚೆಲ್ಲ ಚೆಲ್ಲಂಬರಿಗೋ ಎಂದು ಚರಗ ಚೆಲ್ಲಿದ ಖಾದ್ಯ ತಿನ್ನಲು ಹಕ್ಕಿಗಳು ಜೋಳ ಮಧ್ಯೆ ಕೆಳಗಿಳಿಯುತ್ತವೆ. ಆಗ ಖಾದ್ಯದ ಜೊತೆಗೆ ಕಡಲೆಗೆ ಬಿದ್ದಿರೋ ಕಾಯಿ ಕೊರಕ ಹುಳ ಕಣ್ಣಿಗೆ ಬೀಳುತ್ತವೆ. ಆಗ ಹಕ್ಕಿಗಳು ಕಾಯಿ ಕೊರಕದ ಹುಳುವನ್ನು ತಿನ್ನುತ್ತವೆ. ಇದರಿಂದ ಕಾಯಿ ಕೊರಕದ ಹುಳುಗಳ ನಿಯಂತ್ರಣವಾಗುತ್ತದೆ. ಈ ಕಾರಣಕ್ಕಾಗಿ ಚರಗ ಚೆಲ್ಲುವ ಹಬ್ಬವನ್ನು ತಲಾಂತರದಿಂದ ಆಚರಣೆ ಮಾಡಲಾಗುತ್ತಿದೆ.

ಭೂಮಿಕಾ ರಂಗಪ್ಪ ದಾಸರಡ್ಡಿ, ಬಿದರಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button