ಅಧಿಕಾರಿ, ಸಿಬ್ಬಂದಿಗಳು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಿ – ಜಿಲ್ಲಾಧಿಕಾರಿ ಟಿ.ವೆಂಕಟೇಶ್.

ಚಿತ್ರದುರ್ಗ ಮಾರ್ಚ್.14

ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಶೀಘ್ರವೇ ನೀತಿ ಸಂಹಿತೆ ಜಾರಿಯಾಗುವ ಸಾಧ್ಯತೆ ಇದ್ದು, ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಗಳು ಮುಕ್ತ, ನ್ಯಾಯ ಸಮ್ಮತ ಚುನಾವಣೆಗಾಗಿ ನಿಸ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಸಜ್ಜಾಗುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬುಧವಾರ ಲೋಕಸಭೆ ಚುನಾವಣೆ ಕುರಿತು ಜರುಗಿದ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆಯಲ್ಲಿ ಅವರು ಮಾತನಾಡಿದರು.ನೀತಿ ಸಂಹಿತೆ ಜಾರಿಯಾದ ನಂತರ ಎಲ್ಲಾ ಅಧಿಕಾರಿ ಸಿಬ್ಬಂದಿ ಚುನಾವಣಾ ಆಯೋಗದ ಅಡಿ ಕಾರ್ಯ ನಿರ್ವಹಿಸಬೇಕು. ಚುನಾವಣೆ ಕೆಲಸಗಳಿಗೆ ಈಗಾಗಲೇ ತಂಡಗಳನ್ನು ರಚಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಆಯೋಗದ ಮಾರ್ಗದರ್ಶನ ಹಾಗೂ ಸಲಹೆ ಪಡೆದು ಕ್ರಮಬದ್ದವಾಗಿ ಕೆಲಸ ನಿರ್ವಹಿಸಬೇಕು. ನೋಡಲ್ ಅಧಿಕಾರಿಗಳೊಂದಿಗೆ ಎಲ್ಲಾ ಸಿಬ್ಬಂದಿ ಕೈ ಜೋಡಿಸ ಬೇಕು.

ಯಾವುದೇ ಅಕ್ರಮ, ಅವ್ಯವಹಾರಗಳಿಗೆ ಅವಕಾಶ ಮಾಡಿ ಕೊಡಬಾರದು. ಚುನಾವಣಾ ಆಯೋಗದ ಹೊಸ ನಿರ್ದೇಶನಗಳು ಹಾಗೂ ತೀರ್ಮಾನಗಳ ಬಗ್ಗೆ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಿ ಮನವರಿಕೆ ಮಾಡಿ ಕೊಡಬೇಕು. ಅಂಚೆ ಮತ ಪತ್ರಕ್ಕೆ ನಿರ್ವಹಣೆಗೆ ಹೆಚ್ಚಿನ ಮಹತ್ವ ನೀಡಬೇಕು. ಚುನಾವಣೆ ಅಕ್ರಮ ಅಥವಾ ಅವ್ಯವಹಾರಗಳು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.ಚುನಾವಣೆ ಕಾರ್ಯದ ನಡುವೆಯೂ ಸಾರ್ವಜನಿಕರ ಕುಂದು ಕೊರತೆಗಳನ್ನು ಪರಿಹರಿಸುವ ಕೆಲಸ ಮಾಡಬೇಕು. ಚುನಾವಣೆ ನೆಪ ಹೇಳಿ ದೈನಂದಿನ ಕೆಲಸ ಕಾರ್ಯಗಳ ಬಗ್ಗೆ ನಿರ್ಲಕ್ಷ್ಯ ಸಲ್ಲದು. ಸಾರ್ವಜನಿಕರೊಂದಿಗೆ ಸೌಮ್ಯದಿಂದ ವರ್ತಿಸಬೇಕು. ಬರ ಪರಿಸ್ಥಿತಿ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯ ನಿವಾರಣೆಗೆ ಪ್ರಥಮಾದ್ಯತೆ ನೀಡ ಬೇಕಾಗುತ್ತದೆ. ಚುನಾವಣೆ ಸಮಯದಲ್ಲಿ 24 ಗಂಟೆಯೂ ಕೆಲಸ ಮಾಡ ಬೇಕಾಗುತ್ತದೆ. ಆರೋಗ್ಯದ ಕಡೆಗೂ ಗಮನವಿಟ್ಟು, ತಾಳ್ಮೆ ಹಾಗೂ ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿ, ಸಿಬ್ಬಂದಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ವಿವಿಧ ಶಾಖೆಗಳ ನೋಡಲ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ವರದಿ:ಎನ್. ಆರ್.ರವಿಚಂದ್ರ.ಚಿತ್ರದುರ್ಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button