ಆಲಮಟ್ಟಿ ಡ್ಯಾಮ್ ಗೆ ಬಾಗಿನ – ಅರ್ಪಿಸಿದ ಸಿ.ಎಂ, ಡಿ.ಸಿ.ಎಂ.
ವಿಜಯಪುರ ಸ.06

ಕೃಷ್ಣ ಮೇಲ್ದಂಡೆ ಯೋಜನೆ 3 ನೇ. ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರು ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗ ಬಾರದು. ಇದರಿಂದ ಇಡೀ ಪ್ರಕ್ರಿಯೆ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಆಲಮಟ್ಟಿಯಲ್ಲಿ ಬಾಗಿನ ಅರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೃಷ್ಣ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರ ರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿದ್ದೆ. ಅಲ್ಲಿ ಎಲ್ಲರೂ ಒಪ್ಪಿಗೆ ಪತ್ರ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವು ಒಪ್ಪಿ ಕೊಂಡಿದೆ. ಉಪ ಮುಖ್ಯಮಂತ್ರಿಗಳು ಇತ್ತೀಚಿಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು, ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರೂ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿ ಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು. ಕೃಷ್ಣ ಮೇಲ್ದಂಡೆ ಯೋಜನೆ 3 ನೇ. ಹಂತದಲ್ಲಿ 519.6 ಮೀ ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿ.ಎಂ.ಸಿ ನೀರನ್ನು ಸಂಗ್ರಹಿಸಿ ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿ.ಎಂ.ಸಿ ನೀರನ್ನು 6.6 ಲಕ್ಷ ಹೆಕ್ಟರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಆಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ. ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪ ಮುಖ್ಯಮಂತ್ರಿ 5 ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ, ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗ ಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ, ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ. ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತ ಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು. 2025-26 ನೇ. ಬಜೆಟ್ ನಲ್ಲಿ ಬಾಗಲಕೋಟ್, ಮಂಗಳೂರು, ಕೋಲಾರ, ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆ ಆಧರಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಬಾಗಲಕೋಟೆಯ ಮಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ದೋಣಿ ನದಿಯಲ್ಲಿ ಪ್ರವಾಹ ತಲೆದೋರಿ ರೈತರಿಗೆ ಹಾನಿ ಉಂಟಾಗುತ್ತಿದ್ದು, ರೈತರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ. ಯುಕೆಪಿ ಹಂತ 3 ಕ್ಕೆ ಸಂಬಂಧಿಸಿರಂತೆ ಅಧಿಸೂಚನೆಯನ್ನು ಆದಷ್ಟು ಶೀಘ್ರ ಹೊರಪಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಬಸವರಾಜ. ಸಂಕನಾಳ.ಮುದ್ದೇಬಿಹಾಳ