ಜು. 24 ರಂದು ಚಿಕ್ಕಲಕಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ – ಬಂದ್ ಎಚ್ಚರಿಕೆ.
ತೊದಲಬಾಗಿ ಜು.24

ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದ ರೈತರು ಚಿಕ್ಕಲಕಿ–ತೊದಲಬಾಗಿ ಏತ ನೀರಾವರಿ ಯೋಜನೆಯ ಕಾಮಗಾರಿ ತ್ವರಿತವಾಗಿ ಪೂರ್ಣ ಗೊಳಿಸಿ, ರೈತರ ಜಮೀನುಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ಚಿಕ್ಕಲಕಿ ಕ್ರಾಸ್ನಲ್ಲಿ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ರಾಮಪ್ಪ ಕರ್ಜಗಿ ಅವರ ನೇತೃತ್ವದಲ್ಲಿ ಕಳೆದ ಮೂರು ದಿನಗಳಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಆದರೆ, ರೈತರು ಸತ್ಯಾಗ್ರಹ ಆರಂಭಿಸಿ ಮೂರು ದಿನಗಳು ಕಳೆದರೂ ಸಂಬಂಧಿಸಿದ ನೀರಾವರಿ ಇಲಾಖೆಯ ಯಾವುದೇ ಅಧಿಕಾರಿಗಳು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಸಮಸ್ಯೆಗಳನ್ನು ಆಲಿಸಿಲ್ಲ. ಇದರಿಂದ ಆಕ್ರೋಶ ಗೊಂಡಿರುವ ರೈತರು, ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದ್ದಾರೆ.
ಸತ್ಯಾಗ್ರಹದಲ್ಲಿ ಮಾತನಾಡಿದ ರಾಮಪ್ಪ ಕರ್ಜಗಿ, ಚಿಕ್ಕಲಕಿ–ತೊದಲಬಾಗಿ ಏತ ನೀರಾವರಿ ಯೋಜನೆ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ರೈತರು ನೀರಿಗಾಗಿ ಪರದಾಡುವಂತಾಗಿದೆ. ರೈತರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಸಮಸ್ಯೆ ಆಲಿಸಲು ಮುಂದಾಗದಿರುವುದು ಖಂಡನೀಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಸಮಸ್ಯೆಗಳಿಗೆ ಸ್ಪಂದಿಸದ ಹಾಗೂ ರೈತರ ಹಿತಾಸಕ್ತಿಗೆ ವಿರುದ್ಧವಾಗಿ ನಡೆದು ಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ನೀರಾವರಿ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಿ ರೈತರಿಗೆ ನೀರು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ರೈತರ ಬೇಡಿಕೆಗಳಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸದಿದ್ದರೆ, ರೈತರು ಒಗ್ಗಟ್ಟಾಗಿ ಹೋರಾಟವನ್ನು ತೀವ್ರ ಗೊಳಿಸಲಿದ್ದಾರೆ. ಇದೇ ಜುಲೈ 24 ರಂದು ಚಿಕ್ಕಲಕಿ ಕ್ರಾಸ್ನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಮಪ್ಪ ಕರ್ಜಗಿ ಎಚ್ಚರಿಕೆ ನೀಡಿದರು.
ರೈತರ ಹೋರಾಟಕ್ಕೆ ಸರ್ಕಾರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರ ಗೊಳಿಸಲಾಗುವುದು ಎಂದು ರೈತರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಸಿದ್ದರಾಯ ಸನಸಿದ್ದ, ಅಪ್ಪಶಿ ಕೊಕಟನೂರ್, ಸುನಿಲ್ ಕದಮ್, ಮುಂತಾದರು ಉಪಸ್ಧರಿದ್ದರು.

